14.7.09

ರಾಜಕೀಯ ಮತ್ತು ಏರ‍್ಟೆಲ್ ಜಾಹೀರಾತು

ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ತಪ್ಪಿರುವುದು ಹೌದು, ಬಹುತೇಕ ಸಮಸ್ಯೆಗಳು ರಾಜಕೀಯದಿಂದಾಗಿಯೇ ಹುಟ್ಟಿಕೊಂಡದ್ದೂ ಹೌದು, ಆದರೆ ನಮ್ಮ ಮಾಧ್ಯಮಗಳು ಕೆಟ್ಟ ರಾಜಕೀಯ ವ್ಯವಸ್ಥೆಯನ್ನೇ ತೋರಿಸಬೇಕೇ? ಚೆನ್ನಾಗಿಯೂ ತೋರಿಸಬಹುದಲ್ಲ ಇಂತಹ ಪ್ರಶ್ನೆ, ಆಕ್ಷೇಪ ಅನೇಕರದ್ದು.
ಅದೆಷ್ಟೋ ಚಿತ್ರಗಳಲ್ಲಿ, ಬಹುತೇಕ ಜಾಹೀರಾತುಗಳಲ್ಲಿ ರಾಜಕಾರಣಿಗಳನ್ನು ಕೀಳಾಗಿ, ವಿಲನ್‌ಗಳಾಗಿ ಚಿತ್ರೀಕರಿಸಿದ್ದಾರೆ. ಆದರೆ ತನ್ನದೇ ಆದ ಒರಿಜಿನಾಲಿಟಿಯ ಜಾಹೀರಾತುಗಳನ್ನು ನೀಡುತ್ತಿರುವ ಏರ‍್ ಟೆಲ್ ಕಂಪನಿ ಮಾತ್ರ ಇಲ್ಲಿ ವಿಭಿನ್ನ ಪ್ರಯತ್ನ ಮಾಡಿದೆ. ಇಕ್ಬಾಲ್‌, ವೆಲ್‌ ಕಂ ಟು ಸಜ್ಜನ್‌ಪುರ‍್ ಮುಂತಾದ ಚಿತ್ರಗಳಲ್ಲಿ ಗಮನಾರ್ಹ ಅಭಿನಯ ಮೂಲಕ ಆಕರ್ಷಿಸಿದ್ದ ಶ್ರೇಯಸ್ ತಲ್ಪಾಡೆಯನ್ನು ತಮ್ಮ ಜಾಹೀರಾತು ಸರಣಿಗೆ ಆರಿಸಿಕೊಂಡಿದ್ದೇ ಅವರು ತೆಗೆದುಕೊಂಡ ರಿಸ್ಕ್‌ಗೆ ಉದಾಹರಣೆ.
ಏರ‍್ಟೆಲ್‌ನವರೇ ಹೇಳುವ ಪ್ರಕಾರ ಮಾನವನ ನಡುವಣ ದೃಢವಾದ ಸಂಬಂಧ ಮತ್ತು ಸಂಪರ್ಕಗಳಿಗೆ ಅವರು ಮಹತ್ವ ನೀಡುತ್ತಾರೆ, ಆಧುನಿಕ ಸಂವಹನ ತಂತ್ರಜ್ಞಾನ ಹೇಗೆ ಮನಮನಗಳನ್ನು ಬೆಸೆಯುತ್ತದೆ ಎನ್ನುವುದನ್ನು ತೋರಿಸುವುದೇ ಅವರ ಉದ್ದೇಶ. ಹಾಗಾಗಿ ಅವರು ತಮ್ಮ ಜಾಹೀರಾತುಗಳಲ್ಲಿ ಸ್ಟಾರ್‌ಗಳಿಗೆ ಮಣೆ ಹಾಕಿಲ್ಲ. ಸಾಮಾನ್ಯರನ್ನು, ಪ್ರವರ್ಧಮಾನಕ್ಕೆ ಬರುವ ನಟರನ್ನೇ ಬಳಸಿಕೊಳ್ಳುತ್ತಾರೆ. ಅಭಯ್ ಡಿಯೋಲ್-ರೈಮಾ ಸೇನ್, ಮಾಧವನ್-ವಿದ್ಯಾಬಾಲನ್ ಮುಂತಾದವರನ್ನು ಬಳಸಿಕೊಂಡಿದ್ದು ಇದಕ್ಕೇ.
ಇಬ್ಬರು ಮಕ್ಕಳು ಗಡಿ ದಾಟಿ ಫುಟ್ ಬಾಲ್ ಆಡುವ ಸುಂದರ ಕಲ್ಪನೆ ಏರ್‌ಟೆಲ್‌ನದ್ದು. ಆ ಜಾಹೀರಾತು ಎಂದುಗೂ ಮರೆಯುವಂಥದ್ದಲ್ಲ.
ಇಲ್ಲಿ ನಾನು ಹೇಳುವ ಜಾಹೀರಾತು ಏರ್‌ಟೆಲ್‌ ಸರಣಿಯಲ್ಲಿ ಹೊಸದು. ಜನರಿಂದ ಆರಿಸಿ ಬಂದು ಸಂಸತ್ತಿಗೆ ತೆರಳುವ ಯುವನಾಯಕ. ಅಲ್ಲಿ ಹೋಗಿದ್ದರೂ ತನ್ನೂರಿನ ಜನರ ಸಂಪರ್ಕ ಬಿಡುವುದಿಲ್ಲ ಎನ್ನುವುದು ಈ ಜಾಹೀರಾತಿನ ತಾತ್ಪರ್ಯ.
ಸಂಸತ್ತಿನ ಬಗ್ಗೆ ಗೌರವ, ರಾಜಕಾರಣಿಗಳ ಬಗ್ಗೆ ಧನಾತ್ಮಕತೆ ತೋರಿಸುವಂತಹ ಜಾಹೀರಾತು ಬಳಸುವ ಮೂಲಕ ಏರ‍್ಟೆಲ್ ಒಂದು ಹೆಜ್ಜೆ ಮುಂದೆ ಹೋಗಿದೆ. ಇಲ್ಲವಾದರೆ ಜನರನ್ನು ಸೆಳೆಯಲು ಎಂತೆಂತಹ ಕೊಳಕು ಜಾಹೀರಾತನ್ನು ಬಳಸಬಹುದಿತ್ತು.
ಕೇವಲ ಭಿನ್ನತೆ ಮಾತ್ರವಲ್ಲದೆ ಸಂದೇಶ ನೀಡುವಂತಹ ಇಂತಹ ಜಾಹೀರಾತು ಹೆಚ್ಚೆಚ್ಚು ಬರಲಿ.
ಆ ಜಾಹೀರಾತು ಇಲ್ಲಿದೆ ನೋಡಿ....

Airtel 'Parliament' from Campaign India on Vimeo.

31.5.09

ಪ್ರಮೀಳೆಯರಿಲ್ಲದ ಪ್ರಪಂಚ

ಪ್ರೀತಿಸಿದ ಹುಡುಗಿ ಬೇರೆಯವನೊಂದಿಗೆ ಮದುವೆಯಾಗಿ, ತಾನು ಕೈಹಿಡಿದ ಹುಡುಗಿ ತನ್ನ ಅಧಿಕಪ್ರಸಂಗಿತನಕ್ಕೆ ಬೇಸತ್ತು ವಿಚ್ಛೇದನ ನೀಡಿದ ದಿನ ವಸಂತ ಮಮ್ಮಲ ಮರುಗಿಬಿಟ್ಟ.
ಲೋಕದಲ್ಲೆಲ್ಲೂ ಒಳ್ಳೆಯ ಮನಸ್ಸಿನ ಹೆಂಗಸರೇ ಇಲ್ಲ ಎನ್ನುವ ತೀರ್ಮಾನಕ್ಕೆ ಬಂದ. ಅದುವರೆಗೆ ಫೋಟೋದಲ್ಲಿದ್ದ ದೇವರನ್ನು ಕಣ್ಣೆತ್ತಿ ನೋಡದ ಆತ ಅದೊಂದು ರಾತ್ರಿ ನಿಶ್ಚಲ ಮನಸ್ಸಿನಿಂದ ತಪಸ್ಸಿಗೆ ಕುಳಿತ.
ಹೀಗೆ ಕೆಲ ದಿನಗಳುರುಳಿದವು.. ಈ ಐ.ಟಿ ಯುಗದಲ್ಲೂ ಹಸಿವೆ ನಿದ್ದೆಯನ್ನೆಲ್ಲ ಮೆಟ್ಟಿ ನಿಂತ ವಸಂತನ ದೃಢಚಿತ್ತದಿಂದ ಅಚ್ಚರಿಗೊಂಡ ಭಗವಂತ ಅದೊಂದು ಘಳಿಗೆಯಲ್ಲಿ ಧುತ್ತನೆ ವಸಂತನ ಮುಂದೆ ಪ್ರತ್ಯಕ್ಷನಾದ.
ಏನು ಈ ಯುಗದಲ್ಲೂ ನನಗಾಗಿ ತಪಸ್ಸು ಮಾಡುತ್ತಿರುವೆ? ಎಂದು ಕೇಳಿದ. ಹೆಚ್ಚೇನೂ ಸಂಭ್ರಮ ವ್ಯಕ್ತ ಪಡಿಸದ ವಸಂತ ತಣ್ಣನೆ ಸ್ವರದಲ್ಲಿ ಕೇಳಿದ-ನನಗೆ ವರ ಬೇಕು!
ಭ-ವರವೇ? ಏನದು ಹೇಳು?
ವ-ನಾನು ಹೆಂಗಸರಿಂದ ಬಹಳಷ್ಟು ಸೋತು ಹೋದೆ. ವೈಯಕ್ತಿಕ ಜೀವನದಲ್ಲಿ, ವೃತ್ತಿ ಜೀವನದಲ್ಲಿ...ಏನು ಮಾಡಬೇಕು ಎಂದು ತೋಚುತ್ತಿಲ್ಲ.
ಭ-ಅದು ಅವರವರ ಪ್ರಾರಬ್ಧ ಕರ್ಮ. ಎಷ್ಟೋ ಮಂದಿ ಹೆಂಗಸರಿಂದಾಗಿಯೇ ಒಳ್ಳೆಯ ಬದುಕಿನಲ್ಲಿದ್ದಾರೆ. ನೀನು ಮಾತ್ರ ಹೀಗೆ ಹೇಳುತ್ತಿರುವೆ.
ವ-ನನಗೀಗ ವರವ ಕೊಡು ಭಗವಂತ...ನಾನು ಹೆಂಗಸರೇ ಇಲ್ಲದ ಕಾಲದಲ್ಲಿ, ಅಥವಾ ದೇಶದಲ್ಲಿ, ಅಥವಾ ಜಗತ್ತಿನಲ್ಲಿ ಹುಟ್ಟುವಂತಾಗಬೇಕು.
ಭ-ಇದು ಬಹಳ ಪೇಚಿನ ವರ[ಈ ವರ ಕೊಟ್ಟದ್ದು ತಿಳಿದರೆ ಮಹಿಳಾ ಆಯೋಗದವರ ಕಣ್ಣೂ ಕೆಂಪಾದೀತು]. ಕೊಡುವ ಹಾಗಿಲ್ಲ.
ವ-ಇಲ್ಲ, ಕೊಡಲೇ ಬೇಕು...ನನ್ನ ಭಕ್ತಿಗೆ ಅಷ್ಟಾದರೂ ಬೆಲೆ ಕೊಡಬೇಕು.
ದೇವರಿಗೆ ಈ ಹುಲುಮಾನವ ಒಂದಿಷ್ಟೂ ಬೆದರದೆ ಉತ್ತರಿಸಲು ಕಾರಣವನ್ನು ಕೆಲ ನಿಮಿಷ ಕಾಲ ಚಿಂತಿಸಿದ ದೇವರು ಕೊನೆಗೂ ಈ ಯುಗದಲ್ಲಿ ತಾನು ಮೊದಲ ಬಾರಿ ಪ್ರತ್ಯಕ್ಷವಾಗಿರುವಾಗ ಭಕ್ತನನ್ನು ನಿರಾಸೆಗೊಳಿಸ ಬಾರದು ಎಂದು ತೀರ್ಮಾನಿಸಿ ತಥಾಸ್ತು ಎಂದ. ಆದರೆ ಒಂದು ಷರತ್ತು. ನೀನು ಪ್ರಮೀಳೆಯರಿಲ್ಲದ ಜಗತ್ತಿನಲ್ಲಿ ಹುಟ್ಟಬೇಕಾದರೆ ಮೊದಲು ಈಗಲೇ ಸಾಯಬೇಕು(ಯಾವುದಕ್ಕೂ ಒಂದು ಟೆಸ್ಟ್ ಮಾಡೋಣ ಅನ್ನಿಸಿರಬಹುದು) ಎಂದ.
ಒಪ್ಪಿದ ವಸಂತ ದೇವರಿಗೆ ಥ್ಯಾಂಕ್ಸ್ ಕೂಡಾ ಹೇಳದೆ ಹಿಂದಿರುಗಿದ. ಸಾಯುವುದು ಹೇಗೆ ಎಂದು ಚಿಂತಿಸತೊಡಗಿದ.
ಕೊನೆಗೂ ಸಮುದ್ರಕ್ಕೆ ಹಾರುವುದೇ ಲೇಸು ಎಂದುಕೊಂಡು ಕಡಲತಡಿಗೆ ಹೋದ.
ಅಲ್ಲಿ ನೋಡಿದರೆ ಆಗಲೇ ಒಂದು ಜೀವ ನೀರಲ್ಲಿ ಕೈಕಾಲು ಬಡಿಯುತ್ತಿದೆ...ಮತ್ತೆ ಸಾಯೋಣ ಎಂದು ಅನ್ನಿಸಿ ವಸಂತ ನೀರಿಗೆ ಜಿಗಿದ. ಈಜು ಗೊತ್ತಿದ್ದರಿಂದ ಕೈಕಾಲು ಬಡಿಯುತ್ತಿದ್ದವರನ್ನು ಎಳೆದು ತಂದ.
ನೋಡಿದರೆ ಅದೊಂದು ಹೆಣ್ಣು ಜೀವ. ಆಕೆಯನ್ನು ಪಕ್ಕ ಕೂರಿಸಿ ಕಥೆ ಕೇಳಿದ. ಆಕೆಗೆ ಯಾರೋ ಹುಡುಗ ಕೈಕೊಟ್ಟನಂತೆ, ಅದಕ್ಕೆ ನೀರಿಗೆ ಹಾರಿದಳಂತೆ, ಹಾರಿದ ನಂತರ ಬದುಕಬೇಕು ಅನ್ನಿಸಿತಂತೆ, ಆಗಲೇ ವಸಂತ ಕೈಹಿಡಿನಂತೆ...ಹಾಗೆ ಆಕೆ ಹೇಳುವಾಗ ಆಕೆಯ ಕೈ ವಸಂತನ ಕೈಗಳಲ್ಲಿ ಭದ್ರವಾಗಿತ್ತು. ವಸಂತನಿಗೆ ಸದ್ಯಕ್ಕೆ ಭಗವಂತ ತನಗೆ ನೀಡಿದ ವರ, ಅದಕ್ಕೆ ಹಾಕಿದ ಷರತ್ತು ಮರೆತುಹೋಯಿತು..ಆಕೆಯನ್ನು ಭದ್ರವಾಗಿ ಹಿಡಿದು ಕಡಲ ದಂಡೆಯಲ್ಲಿ ಹೆಜ್ಜೆ ಹಾಕಿದ..
ದೇವಲೋಕದಲ್ಲಿ ಕುಳಿತ ಭಗವಂತ ಮತ್ತು ಆತನ ಸಹವರ್ತಿಗಳು ಕೈಚಪ್ಪಾಳೆ ಹಾಕಿದರು...ಕೊನೆಯಲ್ಲಿ ಭಗವಂತ ಈ ಮಾತು ಹೇಳಿದ 'ಈ ಮೂಢ ಹೆಂಗಸರಿಲ್ಲದ ಪ್ರಪಂಚದಲ್ಲಿ ಬದುಕುವುದು ಅಸಾಧ್ಯ, ನಾನು ಮಾಡಿದ ಪರೀಕ್ಷೆಯಲ್ಲಿ ಸೋತ, ನನ್ನನ್ನು ಅನಾವಶ್ಯಕ ಭೂಮಿಗೆ ಬರಹೇಳಿದ್ದಕ್ಕೆ ಆತನಿಗೆ ಇದೇ ತಕ್ಕ ಶಿಕ್ಷೆ'.
ಹಾಗೆ ಭಗವಂತ ಹೇಳುವಾಗ ನೀರಲ್ಲಿ ಮುಳುಗಿ ಉಪ್ಪುಮಿಶ್ರಿತ ನೀರಿನಿಂದ ಒದ್ದೆಯಾಗಿದ್ದ ಆ ತರುಣಿಯೊಂದಿಗೆ ಬೀಚ್ ಪಕ್ಕದ ದೇವಸ್ಥಾನದಲ್ಲಿ ಕೈಮುಗಿಯಲು ಹೋಗುತ್ತಿದ್ದ!
Related Posts Plugin for WordPress, Blogger...